ಬೆಂಗಳೂರು –
ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 09-05-2021 ರಂದು ಕರ್ನಾಟಕ ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರು ಅವರಿಗೆ ಗೊತ್ತುಪಡಿಸಿರುವ ಮತಗಟ್ಟೆಗಳಲ್ಲಿ ತಮ್ಮ ಮತವನ್ನು ಚಲಾಯಿಸಬಹುದಾಗಿದೆ.

ಈ ಕುರಿತಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿಗಳಾಗಿರುವಂತ ಜಿ.ಎಂ.ಗಂಗಾಧರಸ್ವಾಮಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ, ಜಿಲ್ಲಾ, ಗಡಿನಾಡು ಘಟಕ ಅಧ್ಯಕ್ಷರ ಚುನಾವಣೆಯನ್ನು ನಡೆಸಲು ನಿರ್ಧರಿಸಲಾಗಿದೆ. ದಿನಾಂಕ 09-05-2021ರಂದು ಚುನಾವಣೆ ನಡೆಸಲು ನಿಗದಿ ಪಡಿಸಲಾಗಿದೆ ಎಂದರು

ದಿನಾಂಕ 09-05-2021ಕ್ಕೆ ಮೂರು ವರ್ಷ ಹಿಂದಿನಿಂದ ಸತತವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವವರು ಮಾತ್ರ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ ಹತ್ತು ವರ್ಷಗಳ ಹಿಂದಿನಿಂದ ಸತತವಾಗಿ ಹಾಗೂ ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ ಐದು ವರ್ಷಗಳ ಹಿಂದಿನಿಂದ ಸತತವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕೆಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕರ, ಗಡಿನಾಡು ಘಟಕ ಅಧ್ಯಕ್ಷರ ಚುನಾವಣಾ ಅಭ್ಯರ್ಥಿಗಳ ನಾಮಪತ್ರಗಳನ್ನು ಕೇಂದ್ರ ಚುನಾವಣಾಧಿಕಾರಿಗಳ ಕಚೇರಿಗೆ ದಿನಾಂಕ 29-03-2021 ಸೋಮವಾರದಿಂದ ದಿನಾಂಕ 07-04-2021ರ ಬುಧವಾರದವರೆಗೆ ಪ್ರತಿದಿನ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ( ರಜಾ ದಿನಗಳನ್ನು ಹೊರತುಪಡಿಸಿ) ಸ್ವೀಕರಿಸಲಾಗುವುದು.

ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಸಂಬಂಧ ನಾಮಪತ್ರಗಳನ್ನು ಆಯಾ ಜಿಲ್ಲಾ ಕೇಂದ್ರದ ತಾಲೂಕು ತಹಶೀಲ್ದಾರ ( ಜಿಲ್ಲಾ ಕ.ಸಾ.ಪ ಚುನಾವಣಾಧಿಕಾರಿಗಳು) ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದರು.

ನಾಮಪತ್ರದ ನಮೂನೆಗಳನ್ನು ಒಂದು ಪ್ರತಿಗೆ 10 ರೂ ನಂತೆ ಪಾವತಿಸಿ ಕಚೇರಿ ವೇಳೆಯಲ್ಲಿ ಪಡೆಯಬಹುದು.

ಈ ಎಲ್ಲಾ ನಾಮಪತ್ರಗಳನ್ನು ದಿನಾಂಕ 08-04-2021ರಂದು ಬೆಳಿಗ್ಗೆ 11 ಗಂಟೆಗೆ ಸಂಬಂಧಿಸಿದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನೆ ಮಾಡಲಾಗುವುದು. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ದಿನಾಂಕ 12-04-2021ರ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿರುತ್ತದೆ. ನಂತರ ದಿನಾಂಕ 12-04-2021ರಂದೇ ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುವುದು ಎಂದರು

ಕರ್ನಾಟಕ ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರು ಅವರಿಗೆ ಗೊತ್ತುಪಡಿಸಿರುವ ಮತಗಟ್ಟೆಗಳಲ್ಲಿ ದಿನಾಂಕ 09-05-2021ರಂದು ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಮತವನ್ನು ಚಲಾಯಿಸುವುದು.

ದಿನಾಂಕ 11-05-2021ರಂದು ಗಡಿನಾಡು ಘಟಕಗಳ ಅಧ್ಯಕ್ಷರ ಫಲಿತಾಂಶಗಳನ್ನು ಘೋಷಣೆ ಮಾಡಲಾಗುತ್ತದೆ. ದಿನಾಂಕ 12-05-2021ರಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣಾ ಫಲಿತಾಂಶವನ್ನು ಘೋಷಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ ಒಟ್ಟಾರೆ ಸಾಹಿತ್ಯ ಸಮ್ಮೇಳನ ಮುಂದೂಡಿದ ಈಗ ಪರಿಷತ್ತಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು ಇದು ಸರಿನಾ ಎಂಬ ಪ್ರಶ್ನೆ ಕಾಡುತ್ತಿದೆ.