ಬೆಂಗಳೂರು -
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಮಾಡಿದೆ ಹೌದು ಕರ್ನಾಟಕ ಲೋಕಸೇವಾ ಆಯೋಗದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಅಧಿಕಾರಿಗಳು ನ್ಯಾಯಾಧೀ ಶರ ಎದುರು ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬೆಂಗಳೂರಿನ ಕೋರಮಂಗಲದಲ್ಲಿರುವ ಎನ್ಜಿವಿ (NGV) ನಿವಾಸದಲ್ಲಿ 1ನೇ ಎಸಿಜೆಎಂ (ACJM) ಕೋರ್ಟ್ ನ್ಯಾಯಾಧೀಶರ ಮುಂದೆ ಜ್ಞಾನೇಂದ್ರ ಕುಮಾರ್ ಅವರನ್ನು ಹಾಜರುಪಡಿಸಲಾಯಿತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶ ಹೊರಡಿಸಿದ್ದಾರೆ.ಕೆಪಿಎಸ್ಸಿ ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ಹಾಗೂ ಸಿಐಡಿ ಅಧಿಕಾರಿಗಳು ಜಂಟಿಯಾಗಿ ಕೆಪಿಎಸ್ಸಿ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಅಧಿಕೃತ ತನಿಖೆಯಿಂದ ತಪ್ಪಿಸಿಕೊಳ್ಳಲು ಜ್ಞಾನೇಂದ್ರ ಕುಮಾರ್ ಏಕಾಏಕಿ ನಾಪತ್ತೆಯಾಗಿದ್ದರು.
ಹಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದ ಜ್ಞಾನೇಂದ್ರ ಕುಮಾರ್ ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಲಭ್ಯವಾದ ಮಹತ್ವದ ಸಾಕ್ಷ್ಯಗಳು ಹಾಗೂ ಮಾಹಿತಿಗಳ ಆಧಾರದ ಮೇಲೆ ಅಧಿಕಾರಿ ಗಳು ಅವರನ್ನು ಬಂಧಿಸಿ ಇದೀಗ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ ಪ್ರಕರಣದ ಆಳವಾದ ತನಿಖೆ ಮುಂದುವರಿದಿದ್ದು, ಈ ಹಗರಣದಲ್ಲಿ ಭಾಗಿಯಾಗಿರುವ ಇನ್ನಷ್ಟು ಉನ್ನತಾಧಿಕಾರಿಗಳು ಹಾಗೂ ಮಧ್ಯವರ್ತಿಗಳ ಲಿಂಕ್ ಹೊರಬರುವ ಸಾಧ್ಯತೆಯಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....