ಬೆಂಗಳೂರು –
ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿಕ್ಷಣ ಇಲಾಖೆಯಲ್ಲಿ ನಿವೃತ್ತಿ ಬಡ್ತಿ ಸೇರಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ ಶಿಕ್ಷಕರ ಹುದ್ದೆಗಳಿಗೆ ಇನ್ಮುಂದೆ ಪ್ರತಿ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು.ಪ್ರತಿ ವರ್ಷ ಶಿಕ್ಷಣ ಇಲಾಖೆ ಯಲ್ಲಿ ನಾಲ್ಕೈದು ಸಾವಿರ ಶಿಕ್ಷಕರು ನಿವೃತ್ತಿಯಾಗುತ್ತಾರೆ. ಖಾಲಿಯಾಗಿರುವ ಹುದ್ದೆಗಳನ್ನು ಆಯಾ ವರ್ಷವೇ ಭರ್ತಿಮಾಡುವ ಕುರಿತಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಪ್ರಸ್ತುತ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಿ ಅವರನ್ನು ಶಾಲೆಗೆ ನಿಯೋಜಿಸಲಾಗುವುದು.ಈ ಪೈಕಿ ಕನಿಷ್ಟ 12 ಸಾವಿರ ಹುದ್ದೆಗಳಾದರೂ ಭರ್ತಿಯಾಗುವ ನಿರೀಕ್ಷೆ ಇದೆ ಎಂದರು.
ಇನ್ನೂ ನೇಮಕಾತಿ ಪೂರ್ಣಗೊಂಡ ಬಳಿಕ ಖಾಲಿ ಉಳಿ ಯುವ ಹುದ್ದೆಗಳಿಗೆ ಜನವರಿಯಲ್ಲಿ ಮತ್ತೆ ಸಿಇಟಿ ನಡೆಸಿ ಮತ್ತೊಂದು ನೇಮಕಾತಿ ಪ್ರಕ್ರಿಯೆ ನಡೆಸುತ್ತೇವೆ ಎಂದರು